ಯಾದಗಿರಿ, ಆ.5: ಗುರುಮಠಕಲ್ ಮತಕ್ಷೇತ್ರದ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್, ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಹಾಗೂ ಕರ್ನಾಟಕ ರಾಜ್ಯ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಅವರು ಭೇಟಿ ನೀಡಿ ಘಟನಾ ಸ್ಥಳವನ್ನು ಪರಿಶೀಲಿಸಿದರು.
ದುರಂತದಲ್ಲಿ ಮೂವರು ಅಮಾಯಕ ಕಾರ್ಮಿಕರು ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು ಸಚಿವರು ಸಂತಾಪ ಸೂಚಿಸಿದರು. ಮೃತರ ಕುಟುಂಬಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸೂಕ್ತ ಪರಿಹಾರ ದೊರಕುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.
ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪ ಉಂಟಾಗಿದೆಯೇ ಎಂಬುದರ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು, ಕಾರ್ಮಿಕರ ಜೀವ ಸುರಕ್ಷತೆಗೆ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ತನಿಖೆಯಲ್ಲಿ ದೃಢಪಟ್ಟಲ್ಲಿ, ಸಂಬಂಧಪಟ್ಟ ಕಂಪನಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದರ ಜೊತೆಗೆ ಕಾರ್ಖಾನೆಯ ಅನುಮತಿ ಹಾಗೂ ಮಾನ್ಯತೆಯನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಕಾರ್ಖಾನೆ ಪ್ರತಿನಿಧಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದು, ಘಟನೆಯ ಕುರಿತು ಮಾಹಿತಿ ನೀಡಿದರು.
