Sunday, July 5, 2026
Homeಟಾಪ್ ನ್ಯೂಸ್ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಬದ್ಧ: ಪ್ರಲ್ಹಾದ ಜೋಶಿ

ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಬದ್ಧ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭರವಸೆ ನೀಡಿದ್ದಾರೆ.

ನಗರದಲ್ಲಿ ಕುರುಬ ಸಮುದಾಯ ಅಭಿವೃದ್ಧಿ ವೇದಿಕೆ-ಕರ್ನಾಟಕ ವತಿಯಿಂದ ರಾಜ್ಯಸಭಾ ನೂತನ ಸದಸ್ಯ ಪ್ರೊ.ಎಂ. ನಾಗರಾಜ್ ಅವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ಪಷ್ಟನೆ ಅಗತ್ಯ:
ರಾಜ್ಯ ಸರ್ಕಾರದಿಂದ ಈ ಸಂಬಂಧ ಕೆಲವು ಸ್ಪಷ್ಟನೆಗಳನ್ನು ಕೋರಲಾಗಿತ್ತು. ಅವು ಲಭ್ಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಮುಂದಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಆದಾಗ್ಯೂ, ಸುಪ್ರೀಂ ಕೋರ್ಟ್‌ನ ಕೆಲ ನಿಯಮಾವಳಿಗಳು ಹಾಗೂ ಸಂವಿಧಾನ ತಿದ್ದುಪಡಿಯ ಅಗತ್ಯವಿರುವ ಹಿನ್ನೆಲೆಯಲ್ಲಿ ಪ್ರಕ್ರಿಯೆ ವಿಳಂಬವಾಗಿದೆ. ಅಲ್ಲದೆ, ಪ್ರಸ್ತುತ ಅದೇ ಇಲಾಖೆಯು ದೇಶದಲ್ಲಿ ಜಾತಿಗಣತಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರಣ ಈ ಪ್ರಸ್ತಾವನೆ ಬಾಕಿ ಉಳಿದಿದೆ ಎಂದು ಜೋಶಿ ಸ್ಪಷ್ಟಪಡಿಸಿದರು.

ಬಿಜೆಪಿಗೆ ಬೆಂಬಲದ ಸುಳಿವು:
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಸೇರಿದಂತೆ ಸಮಾಜದ ಮುಖಂಡರು ಮಾತನಾಡಿ, ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಬೇಡಿಕೆಯನ್ನು ಈಡೇರಿಸಬೇಕು. ಈ ಬೇಡಿಕೆ ಈಡೇರಿದರೆ ಸಮುದಾಯವು ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ತಿಳಿಸಿದರು.

ಹೆಚ್ಚಿನ ಸುದ್ದಿ