ಚಿಕ್ಕೋಡಿ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುದೀರ್ಘ ಕಾಲದಿಂದ ಗಡಿಭಾಗದ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತಿರುವ ಚಿಕ್ಕೋಡಿಯ ಹಿರಿಯ ವರದಿಗಾರ ಸಂಜೀವ ವಸಂತ ಕಾಂಬಳೆ ಅವರಿಗೆ 2025ನೇ ಸಾಲಿನ ‘ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ಪ್ರದಾನ ಮಾಡಿದರು. ಗಡಿಭಾಗದ ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಹಾಗೂ ಲೇಖನಗಳ ಮೂಲಕ ಪರಿಹಾರ ಒದಗಿಸುವಲ್ಲಿ ಸಂಜೀವ ಕಾಂಬಳೆ ಅವರು ಮಾಡಿದ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಈ ಹಿಂದೆ 2025ರ ನವೆಂಬರ್ 1 ರಂದು ಬೆಳಗಾವಿ ಜಿಲ್ಲಾಡಳಿತವು ಇವರಿಗೆ ‘ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿತ್ತು ಎಂಬುದು ಗಮನಾರ್ಹ.
ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ವಾರ್ತಾ ಇಲಾಖೆ ಅಧಿಕಾರಿ ಹೇಮಂತ್ ನಿಂಬಾಳ್ಕರ್, ಕಾರ್ಯದರ್ಶಿ ಕಾವೇರಿ, ನಾಡೋಜ ಹಂಪನಾ, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಅಭಿನಂದನೆಗಳ ಮಹಾಪೂರ:
ಸಂಜೀವ ಕಾಂಬಳೆ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿರುವುದಕ್ಕೆ ಚಿಕ್ಕೋಡಿ ತಾಲೂಕು ಕರವೇ ಅಧ್ಯಕ್ಷ ಸಂಜು ಬಡಿಗೇರ, ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
