ಅಥಣಿ: ತಾಲೂಕಿನ ಅಡಳಟ್ಟಿ ಗ್ರಾಮದ ಹಿಪ್ಪರಗಿ ತೋಟದ ಶಾಲೆಯ ಹತ್ತಿರ ಹಳ್ಳಕ್ಕೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ವತಿಯಿಂದ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಭೂಮಿ ಪೂಜೆ ನೆರವೇರಿಸಿದರು.
2025-26ನೇ ಸಾಲಿನ ಲೆಕ್ಕ ಶೀರ್ಷಿಕೆ 7402ರ ಅಡಿಯಲ್ಲಿ ಸುಮಾರು 2 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಈ ಬೃಹತ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು ಕ್ಷೇತ್ರದ ರೈತರ ಹಿತದೃಷ್ಟಿಯಿಂದ ನೀರಾವರಿ ಮತ್ತು ಸಂಪರ್ಕ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅಡಳಟ್ಟಿ ಗ್ರಾಮದ ರೈತರ ಹಲವು ವರ್ಷಗಳ ಬೇಡಿಕೆಯಾಗಿದ್ದ ಈ ಬ್ರಿಜ್ ಕಂ ಬ್ಯಾರೇಜ್ನಿಂದ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಾಗುವುದಲ್ಲದೆ, ಮಳೆಗಾಲದಲ್ಲಿ ಸಂಚಾರಕ್ಕೆ ಎದುರಾಗುತ್ತಿದ್ದ ಸಮಸ್ಯೆಯೂ ನೀಗಲಿದೆ. ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೃಷಿ ಚಟುವಟಿಕೆಗಳಿಗೆ ಪೂರಕವಾದ ಇಂತಹ ಮೂಲಸೌಕರ್ಯಗಳನ್ನು ಒದಗಿಸಲು ನಾನು ಸದಾ ಬದ್ಧ,” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು, ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

