ಶಿಗ್ಗಾಂವಿ: ಕುನ್ನೂರ ಪಂಚಾಯತಿಯ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮದಲ್ಲಿ ಪಶುಸಂಗೋಪನೆಗೆ ಅನುಕೂಲವಾಗಲೆಂದು ನಿರ್ಮಿಸಲಾದ ದನಗಳ ನೀರಿನ ತೊಟ್ಟಿ ಇದೀಗ ಸಂಪೂರ್ಣ ನಿರ್ಲಕ್ಷ್ಯಕ್ಕೆ ಗುರಿಯಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಸಾಕಷ್ಟು ಮನೆಗಳು ಹಸು, ಎಮ್ಮೆ ಸೇರಿದಂತೆ ವಿವಿಧ ದನಗಳನ್ನು ಸಾಕುತ್ತಿದ್ದು, ಅವುಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಪಂಚಾಯಿತಿ ವತಿಯಿಂದ ಈ ನೀರಿನ ತೊಟ್ಟಿಯನ್ನು ನಿರ್ಮಿಸಲಾಗಿತ್ತು.
ಆದರೆ, ನಿರ್ಮಾಣವಾದ ಕೆಲವೇ ದಿನಗಳಲ್ಲೇ ತೊಟ್ಟಿಯ ಸ್ವಚ್ಛತೆಗೆ ಯಾರು ಗಮನ ಹರಿಸದ ಕಾರಣ ಅದು ಕಸ, ಹೂಳು ಮತ್ತು ಪಾಚಿಯಿಂದ ತುಂಬಿ ಹೋಗಿದೆ. ನೀರು ನಿಲ್ಲುವ ಸ್ಥಿತಿಯಲ್ಲಿ ದುರ್ವಾಸನೆ ಉಂಟಾಗುತ್ತಿದ್ದು, ದನಗಳು ಆ ನೀರನ್ನು ಕುಡಿಯಲು ಹಿಂಜರಿಯುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ಪಶುಗಳಿಗೆ ಆರೋಗ್ಯ ಸಮಸ್ಯೆಗಳು ಎದುರಾಗುವ ಭೀತಿ ವ್ಯಕ್ತವಾಗಿದೆ.
ಗ್ರಾಮಸ್ಥರು ಹಲವು ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಂಬಂಧಪಟ್ಟ ಸಿಬ್ಬಂದಿಯ ಗಮನಕ್ಕೆ ಈ ಸಮಸ್ಯೆಯನ್ನು ತಂದಿದ್ದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲವೆಂದು ದೂರಿದ್ದಾರೆ.
“ದನಗಳ ಉಪಯೋಗಕ್ಕಾಗಿ ನಿರ್ಮಿಸಿದ ತೊಟ್ಟಿ ಇದೀಗ ಕೇವಲ ಪ್ರದರ್ಶನ ವಸ್ತುವಾಗಿ ಉಳಿದಿದೆ. ಸ್ವಚ್ಛತೆ ಇಲ್ಲದ ಕಾರಣ ದನಗಳಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ” ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತೊಟ್ಟಿಯ ಸ್ವಚ್ಛತೆ ಮಾಡಿಸಿ, ನಿಯಮಿತವಾಗಿ ನೀರು ತುಂಬಿಸುವ ವ್ಯವಸ್ಥೆ ಹಾಗೂ ನಿರ್ವಹಣೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಹಣದಿಂದ ನಿರ್ಮಿಸಲಾದ ಸೌಲಭ್ಯಗಳು ಸರಿಯಾಗಿ ಬಳಸಿಕೊಳ್ಳುವಂತೆ ನೋಡಿಕೊಳ್ಳುವುದು ಪಂಚಾಯಿತಿಯ ಜವಾಬ್ದಾರಿಯಾಗಿದೆ ಎಂಬ ಮಾತುಗಳು ಗ್ರಾಮದಲ್ಲಿ ಕೇಳಿಬರುತ್ತಿವೆ.
ವರದಿ: ಸೋಮಶೇಖರ ಲಮಾಣಿ
