ಬೆಂಗಳೂರು,ಸೆ.3: ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವ ಎಸ್.ಸಿ.ಪಿ – ಎಸ್.ಟಿ.ಪಿ ಅನುದಾನವನ್ನು ಹಿಂಪಡೆಯಬೇಕು, ರಾಜಕೀಯದಲ್ಲೂ ಒಳಮೀಸಲಾತಿ ಜಾರಿಗೊಳಿಸಿ, ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಹೆಣ್ಣೂರ್ ಶ್ರೀನಿವಾಸ್ ದಲಿತ ಸಂಘರ್ಷ ಸಮಿತಿ ನಿಯೋಗ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿತು.
ಡಿಎಸ್ಎಸ್ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ನೇತೃತ್ವದ ನಿಯೋಗ ಸಚಿವರನ್ನು ಭೇಟಿಯಾಗಿ ಸಮುದಾಯದ ಜ್ವಲಂತ ಸಮಸ್ಯೆಗಳು ಮತ್ತು ವಿವಿಧ ಜಿಲ್ಲೆಗಳ ಕುಂದುಕೊರತೆಗಳ ಕುರಿತು ಚರ್ಚಿಸಿತು.
ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳಿಗೆ ವರ್ಗಾಯಿಸಿರುವ ಎಸ್.ಸಿ.ಪಿ – ಎಸ್.ಟಿ.ಪಿ ಹಣವನ್ನು ಹಿಂಪಡೆದು ಶೋಷಿತರ ಶಾಸನಬದ್ಧ ಅನುದಾನವನ್ನು ಸಮುದಾಯದ ಶ್ರೇಯೋಭಿವೃದ್ಧಿಗೆ ಬಳಕೆ ಮಾಡಬೇಕು. ಎಬಿಸಿಡಿ ವರ್ಗೀಕರಣದಂತೆ ರಾಜಕೀಯ ಕ್ಷೇತ್ರದಲ್ಲೂ ಒಳಮೀಸಲಾತಿ ಜಾರಿಗೊಳಿಸಬೇಕು ಮತ್ತು ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದ ಜಮೀನುಗಳ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ತಕ್ಷಣ ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಸಚಿವ ಮುನಿಯಪ್ಪ ಅವರು, ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕಾನೂನು ಮತ್ತು ಆಡಳಿತಾತ್ಮಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ವೇಳೆ ಡಿಎಸ್ಎಸ್ ರಾಜ್ಯ ಮುಖಂಡರಾದ ಭೀಮ್ ಜ್ಯೋತಿ ,ಮರೀಶ್ ನಾಗನ್ನವರ, ಸೂಲಿಕುಂಟೆ ರಮೇಶ, ಅಶೋಕ ಛಲವಾದಿ ಪಕೀರಪ್ಪ ಹಿರೇಸಲ್ಲಿಕೆರಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
