ರಾಜ್ಯದ ಕೈಗಾರಿಕಾ ಹಾಗೂ ಉದ್ಯೋಗ ಸೃಷ್ಟಿ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ, ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಜಿಲ್ಲೆಯಲ್ಲಿ ಸ್ಥಾಪನೆಗೊಳ್ಳುತ್ತಿರುವ ಪಿಎಂ-ಮಿತ್ರ ಬೃಹತ್ ಜವಳಿ ಪಾರ್ಕ್ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ನಿರ್ಣಯವನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಗೃಹ , ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ-ಮಿತ್ರ ಯೋಜನೆಯಡಿ ಕಲಬುರಗಿಯಲ್ಲಿ 1000 ಎಕರೆ ಪ್ರದೇಶದಲ್ಲಿ ದೇಶದ ಅತಿದೊಡ್ಡ ಸಮಗ್ರ ಜವಳಿ ಉದ್ಯಾನವನ ಸ್ಥಾಪನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಯೋಜನೆಯನ್ನು ಇನ್ನಷ್ಟು ವೇಗವಾಗಿ ಮತ್ತು ಸ್ಪರ್ಧಾತ್ಮಕವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಇದುವರೆಗೆ ಪ್ರಸ್ತಾಪಿಸಲಾಗಿದ್ದ ಪಿಪಿಪಿ ಮಾದರಿಯಿಂದ ರಾಜ್ಯದ ಸಂಸ್ಥೆಯಾದ ಕೆ.ಐ.ಎ.ಡಿ.ಬಿ ಮೂಲಕ ನೇರವಾಗಿ ಅಭಿವೃದ್ಧಿಪಡಿಸುವ ಮಾದರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಯೋಜನೆಯ ಒಟ್ಟು ಅಂದಾಜು ವೆಚ್ಚ ₹1700 ಕೋಟಿ ಆಗಿದ್ದು, ಮೊದಲ ಹಂತದಲ್ಲಿ ಸುಮಾರು ₹320 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗುತ್ತದೆ. ಇದರಲ್ಲಿ 1000 ಎಕರೆ ಪ್ರದೇಶದ ಭೂ ಅಭಿವೃದ್ಧಿ, ರಸ್ತೆ ನಿರ್ಮಾಣ, ಚರಂಡಿ, ಒಳಚರಂಡಿ ಮತ್ತು ಎಫ್ಲುವೆಂಟ್ ಲೈನ್ ನೆಟ್ವರ್ಕ್, ವಿದ್ಯುತ್ ವಿತರಣಾ ವ್ಯವಸ್ಥೆ, ಬೀದಿ ದೀಪಗಳು, 2.5 ಎಂ.ಎಲ್.ಡಿ ಸಾಮರ್ಥ್ಯದ ಶುದ್ಧೀಕರಣ ಘಟಕ, ಪ್ಲಗ್ ಅಂಡ್ ಪ್ಲೆ ಕೈಗಾರಿಕಾ ಕಟ್ಟಡಗಳು, ನೀರು ಸರಬರಾಜು ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳು ನಿರ್ಮಾಣವಾಗಲಿವೆ.
ಈ ಯೋಜನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೀಕರಣಕ್ಕೆ ಹೊಸ ಉತ್ತೇಜನ ಸಿಗಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ರಾಜ್ಯದ ಜವಳಿ ಮತ್ತು ರೆಡಿಮೇಡ್ ಗಾರ್ಮೆಂಟ್ ಕ್ಷೇತ್ರಕ್ಕೆ ಜಾಗತಿಕ ಮಾರುಕಟ್ಟೆ ಅವಕಾಶಗಳು ವಿಸ್ತಾರವಾಗಲಿದ್ದು, ಹೂಡಿಕೆ ಆಕರ್ಷಣೆ ಹಾಗೂ ರಫ್ತು ಸಾಮರ್ಥ್ಯವೂ ಹೆಚ್ಚಲಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿವರಿಸಿದ್ದಾರೆ.
ಕಲಬುರಗಿ ಸೇರಿದಂತೆ ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕಾ ಬೆಳವಣಿಗೆಗೆ ಆದ್ಯತೆ ನೀಡುವ ರಾಜ್ಯ ಸರ್ಕಾರದ ಬದ್ಧತೆಯ ಭಾಗವಾಗಿ ಈ ಯೋಜನೆ ಜಾರಿಗೆ ಬರುತ್ತಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಬಲವಾದ ಅಡಿಪಾಯ ನಿರ್ಮಾಣವಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ ಆಕರ್ಷಣೆ ಮತ್ತು ಪ್ರಾದೇಶಿಕ ಸಮತೋಲ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಪಿಎಂ-ಮಿತ್ರ ಯೋಜನೆ ರಾಜ್ಯದ ಕೈಗಾರಿಕಾ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಅವರು ಹೇಳಿದ್ದಾರೆ.
