Sunday, June 28, 2026
Homeಕ್ರೈಂ ಸುದ್ದಿಗಳುತಲೆಮರೆಸಿಕೊಂಡಿದ್ದ ರೌಡಿ ಕೊನೆಗೂ ಪೊಲೀಸರ ಬಲೆಗೆ

ತಲೆಮರೆಸಿಕೊಂಡಿದ್ದ ರೌಡಿ ಕೊನೆಗೂ ಪೊಲೀಸರ ಬಲೆಗೆ

ಶಿರಸಿ: ಗಡಿಪಾರು ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ರೌಡಿ ಆಸಾಮಿಯನ್ನು ಬನವಾಸಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಬದನಗೋಡ ಗ್ರಾಮದ ನಿವಾಸಿಯಾದ ಸ್ವಾಮೇಲಾ @ ಸುನೀಲ್ ತಂದೆ ಚಂದ್ರಪ್ಪ ಭೋವಿವಡ್ಡರ (24) ವಿರುದ್ಧ 2024 ಹಾಗೂ 2025ನೇ ಸಾಲಿನಲ್ಲಿ ಒಟ್ಟು ಆರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿತ್ತು. ಈತನ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇಡಲಾಗಿದ್ದರೂ, ಆತ ತನ್ನ ರೌಡಿ ಚಟುವಟಿಕೆಗಳನ್ನು ಮುಂದುವರಿಸಿದ್ದರಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಮೂಲಕ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಗಡಿಪಾರು ವರದಿ ಸಲ್ಲಿಸಲಾಗಿತ್ತು.

ಈ ವರದಿಯ ಆಧಾರದ ಮೇಲೆ ಶಿರಸಿ ಉಪವಿಭಾಗಾಧಿಕಾರಿಗಳು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು 2026ರ ಮಾರ್ಚ್ 16ರಂದು ಗಡಿಪಾರು ಆದೇಶ ಹೊರಡಿಸಿದ್ದರು. ಬಳಿಕ ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರ 2026ರ ಮಾರ್ಚ್ 17ರ ಜ್ಞಾಪನ ಪತ್ರದಂತೆ, ಆರೋಪಿಯನ್ನು ಅದೇ ದಿನ ಮಧ್ಯಾಹ್ನ 2 ಗಂಟೆಗೆ ಯಾದಗಿರಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ಮುಂದೆ ಹಾಜರುಪಡಿಸಲಾಗಿತ್ತು.

ಆದರೆ ಆರೋಪಿಯು ಮಾರ್ಚ್ 17ರಂದು ಮಾತ್ರ ಠಾಣೆಗೆ ಹಾಜರಾಗಿ ಹಾಜರಾತಿ ದಾಖಲಿಸಿ, ಮಾರ್ಚ್ 18ರಿಂದ ಠಾಣೆಗೆ ಹಾಜರಾಗದೆ ಗೈರುಹಾಜರಾಗಿದ್ದನು. ಹೀಗಾಗಿ ಗಡಿಪಾರು ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಿರಸಿ ಉಪವಿಭಾಗಾಧಿಕಾರಿಗಳ 2026ರ ಜೂನ್ 8ರ ಆದೇಶದಂತೆ, ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು.

ಅದರಂತೆ 2026ರ ಜೂನ್ 16ರಂದು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಯಿತು.

ಆರೋಪಿಯ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಶಿರಸಿ ವೃತ್ತ ನಿರೀಕ್ಷಕ ಸಂಪತ್ ಇ.ಸಿ. ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ (ಕಾನೂನು ಮತ್ತು ಸುವ್ಯವಸ್ಥೆ) ಮಹಾಂತಪ್ಪ ಜಿ. ಕುಂಬಾರ, ಪಿಎಸ್‌ಐ (ತನಿಖೆ) ರವೀಂದ್ರ ಬಿರಾದಾರ ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.

ತಂಡದಲ್ಲಿ ಕುಮಾರ ಬಣಕಾರ , ಜಗದೀಶ ಕೆ. , ರಾಜೇಶ್ ಪಿ.ಎಂ. , ಬಸವರಾಜ ಜಾಡರ ಹಾಗೂ ಮಂಜಪ್ಪ ಪಿ. ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

2026ರ ಜೂನ್ 23ರಂದು ದಾಸನಕೊಪ್ಪ ಕೆಇಬಿ ಗ್ರಿಡ್ ಸಮೀಪ ಆರೋಪಿಯಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಸ್ವಾಮೇಲಾ @ ಸುನೀಲ್‌ನನ್ನು ವಶಕ್ಕೆ ಪಡೆದುಕೊಂಡರು. ಬಳಿಕ ದಸ್ತಗಿರಿ ನಿಯಮಗಳನ್ನು ಪಾಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.

ಹೆಚ್ಚಿನ ಸುದ್ದಿ