ಕೊಡಗು/ಮಡಿಕೇರಿ: ಕೊಡಗಿನ ದುಬಾರೆ ಆನೆ ಕ್ಯಾಂಪ್ನಲ್ಲಿ ನಡೆದ ಭೀಕರ ದುರಂತವೊಂದರಲ್ಲಿ ಪ್ರವಾಸಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಈ ಆಘಾತಕಾರಿ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಯು ಪ್ರವಾಸಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಕ್ಯಾಂಪ್ನಲ್ಲಿ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.

ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಪ್ರಕಟ-
ಭವಿಷ್ಯದಲ್ಲಿ ಇಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಅರಣ್ಯ ಇಲಾಖೆ ಕಠಿಣ ಹೆಜ್ಜೆ ಇಟ್ಟಿದೆ. ದುಬಾರೆ ಕ್ಯಾಂಪ್ಗೆ ಭೇಟಿ ನೀಡುವ ಪ್ರವಾಸಿಗರಿಗಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪ್ರವಾಸಿಗರಿಗೆ ಆನೆಗಳಿಗೆ ಸ್ನಾನ ಮಾಡಿಸಲು ಅವಕಾಶ ನೀಡಲಾಗುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ, ಇನ್ನು ಮುಂದೆ ಯಾವುದೇ ಪ್ರವಾಸಿಗರು ಆನೆಗಳ ಬಳಿ ತೆರಳಿ ಸ್ನಾನ ಮಾಡಿಸುವಂತಿಲ್ಲ.
ಆನೆ ದುರಂತದಲ್ಲಿ ಮಹಿಳೆ ಸಾವು:
ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ರಾಜ್ಯ ಸರ್ಕಾರವು 20 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದೆ. ಘಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದುಬಾರೆ ಆನೆ ಕ್ಯಾಂಪ್ ಅನ್ನು ಮುಂದಿನ ಎರಡು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ಪ್ರವಾಸಿಗರಿಗೆ ಕ್ಯಾಂಪ್ ಪ್ರವೇಶಿಸಲು ಅವಕಾಶವಿರುವುದಿಲ್ಲ.

