ಕಲಬುರ್ಗಿ : ಜಿಲ್ಲೆಯ ಜೇವರ್ಗಿ ನಗರದ ಕ್ರೀಡಾಂಗಣಕ್ಕೆ ಇತ್ತೀಚೆಗೆ ಸುರಿದ ಬಿರುಗಾಳಿ ಮಳೆ ಭಾರೀ ಹಾನಿ ಉಂಟುಮಾಡಿದ್ದು, ಸ್ಟೇಡಿಯಂ ಕಟ್ಟಡದ ಕೆಲವು ಭಾಗಗಳು ಕುಸಿದು ಹಾನಿಗೊಳಗಾದ ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಸ್ವಲ್ಪ ಮಳೆ ಮತ್ತು ಗಾಳಿಗೂ ಕಟ್ಟಡದ ಭಾಗಗಳು ಹಾನಿಗೊಳಗಾಗಿರುವುದು ಕಾಮಗಾರಿಯ ಗುಣಮಟ್ಟದ ಮೇಲೆ ಅನುಮಾನ ಮೂಡಿಸಿದೆ. ಕಳಪೆ ಕಾಮಗಾರಿ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸೂಕ್ತ ಮೇಲ್ವಿಚಾರಣೆಯ ಕೊರತೆಯಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣವಾಗುವ ಸರ್ಕಾರಿ ಕಟ್ಟಡಗಳು ಈ ರೀತಿಯಾಗಿ ಹಾನಿಗೊಳಗಾಗುವುದು ಅಸ್ವೀಕಾರಾರ್ಹ. ಗುತ್ತಿಗೆದಾರರು, ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಶಾಸಕರ ನಿರ್ಲಕ್ಷ್ಯದಿಂದ ಸರ್ಕಾರದ ಕೋಟ್ಯಾಂತರ ರೂಪಾಯಿ ಸಾರ್ವಜನಿಕ ಹಣ ವ್ಯರ್ಥವಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ಕಾಮಗಾರಿಯ ಗುಣಮಟ್ಟ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಜನರ ಸುರಕ್ಷತೆ ಹಾಗೂ ಸಾರ್ವಜನಿಕ ಆಸ್ತಿಯ ರಕ್ಷಣೆ ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
