Sunday, June 21, 2026
Homeಕ್ರೈಂ ಸುದ್ದಿಗಳುಮದುವೆ ಪ್ರಶ್ನಿಸಿದಕ್ಕೆ ಪ್ರಿಯತಮೆಯ ಹತ್ಯೆ: ಮಹಾರಾಷ್ಟ್ರದ ಕಾಡಿನಲ್ಲಿ ಶವ ಎಸೆದು ಪರಾರಿಯಾಗಿದ್ದ ಆರೋಪಿಗಳು ಸೆರೆ

ಮದುವೆ ಪ್ರಶ್ನಿಸಿದಕ್ಕೆ ಪ್ರಿಯತಮೆಯ ಹತ್ಯೆ: ಮಹಾರಾಷ್ಟ್ರದ ಕಾಡಿನಲ್ಲಿ ಶವ ಎಸೆದು ಪರಾರಿಯಾಗಿದ್ದ ಆರೋಪಿಗಳು ಸೆರೆ

ಬೆಳಗಾವಿ: ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಬೇರೆ ಮದುವೆಯಾಗಲು ಮುಂದಾಗಿದ್ದ ಪ್ರಿಯಕರನನ್ನು ಪ್ರಶ್ನಿಸಿದ್ದಕ್ಕೆ ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಶವವನ್ನು ಮಹಾರಾಷ್ಟ್ರದ ದಟ್ಟ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಗಂಗವ್ವ ಹಂಚಿನಮನಿ (25) ಕೊಲೆಯಾದ ಯುವತಿ. ಹುಕ್ಕೇರಿ ತಾಲೂಕಿನ ರಾಜನಕಟ್ಟಿ ಗ್ರಾಮದ ಬಸವರಾಜ್ ಕರ್ನಾವರ್ (33) ಪ್ರಮುಖ ಆರೋಪಿ. ಬಸವರಾಜ್ ತನ್ನ ತಂದೆ ಯಲ್ಲಪ್ಪ ಹಾಗೂ ಮಾವ ಲಗಮಪ್ಪ ಜೊತೆ ಸೇರಿಕೊಂಡು ಕೃತ್ಯ ಎಸಗಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಆರೋಪಿಗಳು ಗಂಗವ್ವಳನ್ನು ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ, ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ತಿಲಾರಿ ಘಾಟ್ ಪ್ರದೇಶದ ದಟ್ಟ ಕಾಡಿನಲ್ಲಿ ಶವವನ್ನು ಎಸೆದು ಬಂದಿದ್ದರು.
ಮೇ 29ರಂದು ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಚಂದಗಡ ಪೊಲೀಸರು, ರಸ್ತೆಯ ಸಿಸಿಟಿವಿ ದೃಶ್ಯಗಳು ಹಾಗೂ ಟೋಲ್‌ಗೇಟ್ ದಾಖಲೆಗಳ ಆಧಾರದ ಮೇಲೆ ತನಿಖೆ ನಡೆಸಿದರು. ಮಹಿಳೆ ಕಾರಿನಲ್ಲಿ ತೆರಳಿದ್ದ ಮಾಹಿತಿ ದೊರೆತ ಬಳಿಕ ವಾಹನದ ಸಂಖ್ಯೆಯನ್ನು ಪತ್ತೆಹಚ್ಚಿ ಆರೋಪಿಗಳ ಸುಳಿವು ಕಂಡುಹಿಡಿದರು.

ಶವಕ್ಕೆ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೊಲೀಸರು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಬಳಿಕ ಸತತ ತನಿಖೆ ನಡೆಸಿ ಬಸವರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹೆಚ್ಚಿನ ಸುದ್ದಿ