Saturday, April 18, 2026
Homeಟಾಪ್ ನ್ಯೂಸ್ಸಿದ್ದಾಪುರದ ಮೂಲದ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ್‌ಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಬಡ್ತಿ

ಸಿದ್ದಾಪುರದ ಮೂಲದ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ್‌ಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಬಡ್ತಿ

ಸಿದ್ದಾಪುರ :ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಪುತ್ರ, ಸಿದ್ದಾಪುರ ತಾಲೂಕಿನ ಕಾನಗೋಡು ಗ್ರಾಮದವರಾದ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ್ ಅವರಿಗೆ ಕೇಂದ್ರ ಸರ್ಕಾರದಲ್ಲಿ ಮಹತ್ವದ ಜವಾಬ್ದಾರಿ ಒಲಿದುಬಂದಿದೆ. ಕೇಂದ್ರ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರಿಗೆ, ಇದೀಗ ಕೇಂದ್ರ ಕಾರ್ಮಿಕ ಮತ್ತು ಸಬಲೀಕರಣ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ ನೀಡಿ ಆದೇಶ ಹೊರಡಿಸಲಾಗಿದೆ.

ದಕ್ಷ ಅಧಿಕಾರಿಗೆ ಒಲಿದ ಉನ್ನತ ಹುದ್ದೆ:
2009ನೇ ಬ್ಯಾಚ್‌ನ ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ತೇಜಸ್ವಿ ನಾಯ್ಕ್, ಪ್ರಸ್ತುತ ಶಿರಸಿಯಲ್ಲಿ ನೆಲೆಸಿದ್ದಾರೆ. ಮಧ್ಯಪ್ರದೇಶದಲ್ಲಿ ತಮ್ಮ ಕಟ್ಟುನಿಟ್ಟಿನ ಆಡಳಿತ ಹಾಗೂ ಜನಪರ ಕಾರ್ಯಗಳ ಮೂಲಕ ದಕ್ಷ ಅಧಿಕಾರಿಯಾಗಿ ಹೆಸರು ಮಾಡಿರುವ ಇವರು, ಅಲ್ಲಿ ಜಾರಿಗೆ ತಂದಿದ್ದ ‘ಜಲಮಿಷನ್’ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಇವರ ಆಡಳಿತಾತ್ಮಕ ಕಾರ್ಯಕ್ಷಮತೆಗೆ ಇದು ಉತ್ತಮ ನಿದರ್ಶನವಾಗಿದೆ.

ಅಪಾರ ಅನುಭವ ಮತ್ತು ಸಾಧನೆ:
ತೇಜಸ್ವಿ ನಾಯ್ಕ್ ಅವರು ಈ ಹಿಂದೆ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರ ಆಪ್ತ ಕಾರ್ಯದರ್ಶಿಯಾಗಿಯೂ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವಾಲಯಗಳಲ್ಲಿ ಅವರಿಗಿರುವ ಸುದೀರ್ಘ ಆಡಳಿತಾತ್ಮಕ ಅನುಭವ ಹಾಗೂ ದಕ್ಷತೆಯನ್ನು ಗುರುತಿಸಿ ಕೇಂದ್ರ ಸರ್ಕಾರವು ಈ ಮಹತ್ವದ ಜಂಟಿ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿಯನ್ನು ನೀಡಿ ಗೌರವಿಸಿದೆ.

ದಂಪತಿಗಳಿಬ್ಬರೂ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಗಳು:
ತೇಜಸ್ವಿ ನಾಯ್ಕ್ ಅವರ ಪತ್ನಿ ಸ್ವಾತಿ ಮೀನಾ ನಾಯ್ಕ್ ಅವರು ಕೂಡ ಐಎಎಸ್ ಅಧಿಕಾರಿಯಾಗಿದ್ದು, ಆಡಳಿತ ಯಂತ್ರದಲ್ಲಿ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ. ಪ್ರಸ್ತುತ ಅವರು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವುದು ಮತ್ತೊಂದು ವಿಶೇಷ. ಕೇಂದ್ರದ ಉನ್ನತ ಹುದ್ದೆಗೆ ಪದೋನ್ನತಿ ಹೊಂದಿರುವ ತೇಜಸ್ವಿ ನಾಯ್ಕ್ ಅವರಿಗೆ ಜಿಲ್ಲೆಯಾದ್ಯಂತ ವ್ಯಾಪಕ ಅಭಿನಂದನೆಗಳು ಹಾಗೂ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಹೆಚ್ಚಿನ ಸುದ್ದಿ