Friday, April 10, 2026
Homeಜಿಲ್ಲಾ ಸುದ್ದಿಗಳುಯಾದಗಿರಿಅರ್ಥಪೂರ್ಣವಾಗಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ

ಅರ್ಥಪೂರ್ಣವಾಗಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ

ಯಾದಗಿರಿ. : ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ
ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರ ಅಧ್ಯಕ್ಷತೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸುವ ಕುರಿತು ಇತ್ತೀಚೆಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಅಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಜಯಂತಿ ಆಯೋಜಿಸಲು, ಡಾ.ಬಿ.ಆರ್.ಅಂಬೇಡ್ಕರ್ ಅವರ
ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲು, ನಿರ್ಧರಿಸಲಾಯಿತು.

ಅದರಂತೆ ವೇದಿಕೆ, ಆಸನದ ವ್ಯವಸ್ಥೆ, ಶಿಷ್ಟಾಚಾರದಂತೆ ಗಣ್ಯರನ್ನು, ಉಪನ್ಯಾಸಕರನ್ನು ಆಹ್ವಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು, ಕಾರ್ಯಕ್ರಮದ ಸಂದರ್ಭದಲ್ಲಿ , ಸೂಕ್ತ ಪೋಲಿಸ್ ಬಂದೋಬಸ್ತ್,
ವೇದಿಕೆ ಸಿದ್ಧತೆ ನೋಡಿಕೊಳ್ಳಲು , ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ,ಆಮಂತ್ರಣ ಪತ್ರಿಕೆ ವಿತರಿಸುವ ವ್ಯವಸ್ಥೆಗೆ,ಮೆರವಣಿಗೆಗೆ ಮೂರು ಕಲಾ ತಂಡಗಳನ್ನು ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ತಾಲೂಕ ಮಟ್ಟದಲ್ಲಿ ಶಾಲಾ, ಕಾಲೇಜು, ಗ್ರಾಮ ಪಂಚಾಯತ್, ವಿವಿಧ ಕಚೇರಿ ಗಳಲ್ಲಿ ಈ ಜಯಂತಿ ಆಚರಣೆ, ಮುಖ್ಯ ಕಾರ್ಯಕ್ರಮಕ್ಕೆ, ಅಗತ್ಯ ಸಿದ್ಧತೆ ಮಾಡಿಕೊಳ್ಳಲು
ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಅಂದು ಡಾ..ಬಿ.ಆರ್.ಅಂಬೇಡ್ಕರ್ ಭವನದ ಮುಂದುಗಡೆ ರಸ್ತೆ ಮತ್ತು ಚರಂಡಿ ಸ್ವಚ್ಛತೆಗೆ ನಗರಸಭೆಯಿಂದ ಕ್ರಮ ಕೈಗೊಳ್ಳಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಚೌಕ್ ನಲ್ಲಿ ಹಾಗೂ ಕೋಟಗಾರ ವಾಡಾದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಬೆಳಿಗ್ಗೆ 9-30ಕ್ಕೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಹಾಗೂ ಗೌರವ ಅರ್ಪಣೆ ನಡೆಯಲಿದ್ದು, ಅವಶ್ಯಕ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಸಮಾಜ ಸೇವಕರಿಗೆ ಸನ್ಮಾನಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ವ್ಯಕ್ತಿಗಳನ್ನು ಆಯ್ಕೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ,ಈ ಕಾರ್ಯಕ್ರಮದ ದಿನದಂದು ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಆರೋಗ್ಯ ತಪಾಸಣೆ ಮೇಳ ಆಯೋಜಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜದ ಮೂಲಕ ಹಮ್ಮಿಕೊಳ್ಳಲಾಗುವ ಮೆರವಣಿಗೆ ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲು ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀ ಚನ್ನಬಸವ ಸ್ವಾಗತಿಸಿದರು. ಸಾಮಾಜದ ಮುಖಂಡರಾದ ಮರೆಪ್ಪ ಚಟ್ಟರ್ಕರ್,ಸೈದಪ್ಪ ಕೋಳೂರ,ಪರಶುರಾಮ ಒಡೆಯರ್, ವಿಜಯಕುಮಾರ ಶಿರಗೋಳ, ಮಲ್ಲಿಕಾರ್ಜುನ ಕ್ರಾಂತಿ, ಚಂದಪ್ಪ ಕಟ್ಟಿಮನಿ ಇತರರು ಉಪಸ್ಥಿತರಿದ್ದರು

ಹೆಚ್ಚಿನ ಸುದ್ದಿ