
ತಾಲೂಕು ಕಾನೂನು ಸೇವಾ ಸಮಿತಿ ಉದ್ಘಾಟನೆ ಮಾಡಲಾಯಿತು.
ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಪಟ್ಟಣದಲ್ಲಿ ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ ಅವರು ನೂತನ ನ್ಯಾಯಾಧೀಶರ ವಸತಿ ಗೃಹ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯನ್ನು ಉದ್ಘಾಟಿಸಿದರು.
ಬೆಳಗಾವಿ ಜಿಲ್ಲಾ ನ್ಯಾಯಾಂಗ ಹಾಗೂ ಲೋಕೋಪಯೋಗಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನ್ಯಾಯಾಲಯ ಸಂಕೀರ್ಣದ ಬಳಿ ಈ ಕಾರ್ಯಕ್ರಮ ಜರುಗಿತು.
ಈ ಮುಂಚೆ ಬೈಲಹೊಂಗಲ ನ್ಯಾಯಾಲಯದ ಮೂಲಕ ನಡೆಯುತ್ತಿದ್ದ ಕಾನೂನು ಸೇವೆಗಳು ಈಗ ಸ್ಥಳೀಯವಾಗಿ ಲಭ್ಯವಾಗುವುದರಿಂದ ವಕೀಲರಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ನ್ಯಾಯಾಧೀಶರು ತಿಳಿಸಿದರು.
ಹಾಗೆಯೇ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಧೀಶರಿದ್ದಾಗಲೇ ಗೃಹಪ್ರವೇಶವಾಗುವಂತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರು 11 ತಿಂಗಳ ನಿಗದಿತ ಅವಧಿಯ ಬದಲಾಗಿ 7 ತಿಂಗಳಿನಲ್ಲೇ ವಸತಿ ಗೃಹ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಪ್ರವೀಣ ಚವಾಣ್, ಮಹಮ್ಮದ ಅಲಿ ನಾಯಕ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷ ಎಸ್.ಡಿ. ಬೋಗೂರು ಹಾಗೂ ಹಲವು ನ್ಯಾಯವಾದಿಗಳು ಭಾಗವಹಿಸಿದ್ದರು.
ಸಂಪಾದಕರು: ರಾಮಚಂದ್ರಪ್ಪ ಪೂಜೇರ
