ಬೆಂಗಳೂರು: ರಾಜ್ಯ ಸರ್ಕಾರದ ಯೋಜನಾ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ನಿಧನಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ಕಂಬನಿ ಮಿಡಿದಿದ್ದಾರೆ.
ಸಂಪುಟ ಸಹೋದ್ಯೋಗಿಯಾಗಿದ್ದ ಡಿ ಸುಧಾಕರ್ ಅವರು ಸರಳತೆ, ಸಜ್ಜನಿಕೆ, ಜನಪರ ಧೋರಣೆ ಹಾಗೂ ಸ್ನೇಹಮಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು. ಮೊದಲಿಗೆ, ಚಳ್ಳಕೆರೆ ಕ್ಷೇತ್ರದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಅವರು ತಮ್ಮ ಕ್ರಿಯಾಶೀಲತೆಯಿಂದ ಹಿರಿಯೂರು ಕ್ಷೇತ್ರದ ಜನರ ಬೆಂಬಲ ಗಳಿಸುವಲ್ಲಿಯೂ ಯಶಸ್ವಿಯಾಗಿದ್ದರು ಎಂದು ಅವರು ನೆನೆದಿದ್ದಾರೆ.
ಆಸ್ಪತ್ರೆಗೆ ದಾಖಲಾಗುವುದಕ್ಕೂ ಮುನ್ನ ಒಮ್ಮೆ ತಮ್ಮನ್ನು ಭೇಟಿಯಾಗಿ ಕ್ಷೇತ್ರದ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಇನ್ನೂ ನನ್ನ ಮನಸ್ಸಿನಲ್ಲಿ ಗಾಢವಾಗಿದೆ. ಕ್ಷೇತ್ರದ ಜನರ ಬಗ್ಗೆ ಅವರಿಗೆ ಅಪಾರವಾದ ಕಾಳಜಿ ಇತ್ತು ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
